ಹಿಂಗ್ಯಾಕೆ?
ಅರ್ಥ ಹುಡುಕುವ ಸಡಗರದಲ್ಲಿ ಬದುಕು ಕಳೆದುಹೋಗಿದೆ!
May 20, 2025
ಪಕ್ಷಿ ವೀಕ್ಷಣೆಯ ಫೀಲ್ಡ್ ಡೈರಿ ಭಾಗ 3: ಆಗರ ಕೆರೆಯಲ್ಲಿನ್ನೊಂದು ದಿನ - 31/12/2024
May 2, 2025
ಪಕ್ಷಿ ವೀಕ್ಷಣೆಯ ಫೀಲ್ಡ್ ಡೈರಿ ಭಾಗ 2: ಆಗರ ಕೆರೆಯಲ್ಲೊಂದು ದಿನ…
![]() |
ಬೆಳಗಿನ ಕಾಯಕ |
ಕೆರೆಗಳು ನೀರು ತುಂಬಿಕೊಂಡಿರುವಾಗ ಪಕ್ಷಿಗಳ ಸಂಖೈ ಒಂದಷ್ಟು ಕಡಿಮೆಯೆಂದೇ ಹೇಳಬೇಕು. ಒಂದಷ್ಟು ಗುಳುಕಮುಳುಕ, ಬೆಳ್ಳಕ್ಕಿ, ಬೂದು ಕೊಕ್ಕರೆ, ನೀರುಕಾಗೆ ಬಿಟ್ಟರೆ ಹೆಚ್ಚಿನ ಪಕ್ಷಿಗಳು ಕಾಣಿಸಲಿಲ್ಲ. ಮಂಜು ಕೆರೆಯ ಮೇಲ್ಮೈಯನ್ನು ಆವರಿಸಿತ್ತು. ಮಂಜಿನ ಹಿನ್ನಲೆಯಲ್ಲಿ ಗುಳುಕಮುಳುಕದ ಫೋಟೋ ತೆಗೆಯುವಷ್ಟರಲ್ಲಿ ಮಂಜಿನ ಹೊದಿಕೆ ಮತ್ತಷ್ಟು ದಟ್ಟವಾಯಿತು. ಎದುರಿನ ಅರಣ್ಯದ ಭಾಗ ಕಾಣಿಸದಂತಾಯಿತು. ಬೆಳಕರಿಯುವ ಮುನ್ನವೇ ತೆಪ್ಪದಲ್ಲಿ ಮೀನಿಡಿಯಲು ಅತ್ತ ಕಡೆಗೆ ಸಾಗಿದ್ದವರು ಮಂಜಿನ ಹೊದಿಕೆಯಲ್ಲಿ ಇತ್ತ ಕಡೆಯ ತೀರಕ್ಕೆ ಸಾಗಿ ಬರುತ್ತಿದ್ದ ದೃಶ್ಯ ವೈಭವಯುತವಾಗಿತ್ತು. ಗಿಡಮರಗಳ ಪ್ರತಿಬಿಂಬದ ಚಿತ್ರಗಳನ್ನು ಕ್ಯಾಮೆರಾಗೆ ತುಂಬಿಕೊಂಡೆ. ಕೊಂಚ ಸಮಯದ ಕಳೆದ ನಂತರ ಮಂಜಿನ ಹೊದಿಕೆ ನಿಧಾನವಾಗಿ ಸರಿದುಕೊಳ್ಳಲಾರಂಭಿಸಿತಾದರೂ ರವಿಯು ಮೋಡದ ನಡುವಿನಿಂದ ಹೊರಬರಲು ಉತ್ಸಾಹ ತೋರಲಿಲ್ಲ.
Jan 16, 2025
ಪಕ್ಷಿ ವೀಕ್ಷಣೆಯ ಫೀಲ್ಡ್ ಡೈರಿ ಭಾಗ 1: ಬಿಬಿಎಂಪಿ ಪಾರ್ಕಿನಲ್ಲಿ ಸಿಕ್ಕ ನೊಣಹಿಡುಕಗಳು.
![]() |
Indian paradise flycatcher/ ಬಾಲದಂಡೆ/ ರಾಜಹಕ್ಕಿ |
ಹೆಂಡ್ರುಗೆ ಆರ್.ಆರ್. ನಗರದಲ್ಲಿ ಒಂದಷ್ಟು ಕೆಲಸವಿತ್ತು. ಅವಳನ್ನು ಬಿಟ್ಟು ನಾನು ಮಕ್ಕಳು ಹತ್ತಿರದ ಹೋಟೆಲ್ಲಿಗೆ ಹೋಗಿ ತಿಂಡಿ ತಿಂದೆವು. ಎರಡು ತಾಸು ಸಮಯ ಕಳೆಯಬೇಕಿತ್ತು. ಗೂಗಲ್ಲಿನಲ್ಲಿ ಹತ್ತಿರದಲ್ಲಿರುವ ಪಾರ್ಕಿನ ಪಟ್ಟಿ ತೋರಿಸಲು ಕೇಳಿದೆ. ಎಲ್ಲದಕ್ಕಿಂತ ಸಮೀಪವಿದ್ದ ಹೆಸರಿಲ್ಲದ ಬಿಬಿಎಂಪಿ ಪಾರ್ಕಿಗೆ ಹೋದೆವು. ಮಕ್ಕಳಿಗೆ ಆಟವಾಡಲಿದ್ದ ಜಾಗದ ಹಿಂದೆ ಬಿದಿರಿನ ಪುಟ್ಟ ಮೆಳೆಯಿತ್ತು. ಬಿದಿರಿನ ಮೆಳೆಯ ಹಿಂದೆ ಎರಡು ಗಸಗಸೆ (ಸಿಂಗಾಪೂರ್ ಚೆರ್ರಿ) ಹಣ್ಣಿನ ಮರಗಳಿದ್ದವು. ಗಾತ್ರ ನೋಡಿದರೆ ಐದಾರು ವರ್ಷಗಳ ಆಯಸ್ಸು. ಅಳಿಲುಗಳು ಚಿಂವ್ಗುಟ್ಟುತ್ತಿದ್ದವು. ಗಸಗಸೆ ಮರದ ಬಳಿ ಇದ್ದಕ್ಕಿದ್ದಂತೆ ಅಚ್ಚ ಬಿಳುಪಿನ ಹಾಳೆಯೊಂದು ಮಣ್ಣಿನಿಂದ ಗಿಡದ ಕಡೆಗೆ ತೂರಿಹೋದಂತೆನ್ನಿಸಿತು. ಏನದು ಎಂದು ಕತ್ತೆತ್ತಿ ನೋಡಿದವನಿಗೆ ಕಂಡದ್ದು ಇಂಡಿಯನ್ ಪ್ಯಾರಡೈಸ್ ಫ್ಲೈಕ್ಯಾಚರ್ (ಬಾಲದಂಡೆ, ರಾಜಹಕ್ಕಿ). ಅರೆರೆ ಈ ಪಕ್ಷಿ ನೋಡಲೆಂದೇ ಒಮ್ಮೆ ನಂದಿ ಬೆಟ್ಟಕ್ಕೆ ಹೋಗಿದ್ದೆನಲ್ಲವೇ? ದೂರದಲ್ಲಿ ಕಾಣಿಸಿತ್ತಷ್ಟೇ. ಕುಣಿಗಲ್ಲಿನ ಬಳಿ ಒಮ್ಮೆ ಕಂದು ಬಣ್ಣದಲ್ಲಿದ್ದ ನೊಣಹಿಡುಕ ಸಿಕ್ಕಿತ್ತು, ಸುಮಾರಾಗಿ ಹತ್ತಿರದಲ್ಲಿ. ಕುಕ್ಕರಹಳ್ಳಿ ಕೆರೆ, ಕಣ್ವ ಜಲಾಶಯದ ಬಳಿ ಹತ್ತಿರದಲ್ಲೇ ಸಿಕ್ಕಿತ್ತು, ಕ್ಯಾಮೆರಾ ಕೈಯಲ್ಲಿರಲಿಲ್ಲ. ಇವತ್ತೂ ಕ್ಯಾಮೆರಾ ಕೈಯಲ್ಲಿಲ್ಲದಾಗಲೇ ಇಷ್ಟು ಹತ್ತಿರದಲ್ಲಿ ಬಂದು ಕೂರಬೇಕಾ?! ಮಕ್ಕಳಿತ್ತ ಆಟವಾಡುತ್ತಿದ್ದರು. ನಾನು ಪಕ್ಷಿಯ ದಿನಚರಿಯನ್ನು ವೀಕ್ಷಿಸುತ್ತಿದ್ದೆ. ಅದರ ಉದ್ದನೆಯ ಬಾಲ ಗಾಳಿಯಲ್ಲಿ ತುಯ್ದಾಡುವುದನ್ನು ಕಾಣುವುದೇ ಒಂದು ಸೊಗಸು. ಅಷ್ಟು ಉದ್ದನೆಯ ಬಾಲವನ್ನೊತ್ತುಕೊಂಡು ಗಸಗಸೆ ಮರದ ಪೀಚು ಹಣ್ಣುಗಳು, ಎಲೆಗಳ ನಡುವಿದ್ದ ಸಣ್ಣ ಪುಟ್ಟ ಹುಳ – ನೊಣಗಳನ್ನು ಹಿಡಿಯಲು ಆಗೊಮ್ಮೆ ಈಗೊಮ್ಮೆ ನೆಲದ ಬಳಿ ಬಂದು ಮತ್ತೆ ಹಿಂದಿರುಗಿ ಗಸಗಸೆ ಮರ ಹಾಗು ಸುತ್ತಮುತ್ತಲಿದ್ದ ಇತರೆ ಮರಗಳ ಮೇಲೆ ಕುಳಿತು ವಿರಮಿಸಿಕೊಳ್ಳುತ್ತಿತ್ತು. ಸುತ್ತಮುತ್ತಲೆಲ್ಲ ಮನೆಗಳೇ ಇರುವ ಜಾಗದಲ್ಲಿ ಇಂತಹ ಪಕ್ಷಿ ನೋಡಿದೆನೆಂದು ಹೇಳಿದರೆ ಯಾರಾದರೂ ನಂಬದೇ ಹೋದರೆ ಎಂಬ ನೆಪದಲ್ಲಿ ನನ್ನ ಸಮಾಧಾನಕ್ಕೆ ಮೊಬೈಲಿನಲ್ಲೇ ಸುಮ್ಮನೊಂದು ವೀಡಿಯೋ ತೆಗೆದೆ! ಈ ಉದ್ದ ಬಾಲದ ನೊಣಹಿಡುಕನ ಜೊತೆಯೇ ಕೆಂಪುಕೊರಳಿನ ನೊಣಹಿಡುಕುಗಳ (ಟಿಕೆಲ್ಸ್ ಬ್ಲೂ ಫ್ಲೈಕ್ಯಾಚರ್) ದರ್ಶನವೂ ಆಯಿತು. ʻಕ್ಯಾಮೆರಾ ಇಲ್ಲದಾಗಲೇ ಎಲ್ಲ ಬಂದು ಕುಣೀರಪ್ಪʼ ಎಂದು ಬಯ್ದುಕೊಂಡೆ!
Dec 28, 2024
ಕ್ಯಾಪಿಟಲಿಸಂ ಬಿಟ್ಟು ಬೇರೆ ಆಯ್ಕೆ ನಿಜಕ್ಕೂ ನಮ್ಮ ಮುಂದಿದೆಯೇ?
![]() |
image source: yourdictionary |
ಡಾ. ಅಶೋಕ್. ಕೆ. ಆರ್.
ಯಾರಾದರೂ
ಎಡಪಂಥೀಯ – ಬಲಪಂಥೀಯ ಅಂತ ಮಾತನಾಡುವಾಗ, ವಾದ ಮಾಡುವಾಗ ನಿಜಕ್ಕೂ ಈಗ ನಮ್ಮಲ್ಲಿ ಎಡಪಂಥೀಯತೆ – ಬಲಪಂಥೀಯತೆ
ಅನ್ನುವುದಿದೆಯೇ ಎನ್ನುವ ಪ್ರಶ್ನೆ ನನ್ನಲ್ಲಿ ಮೂಡುತ್ತಲೇ ಇರುತ್ತದೆ. ಈ ರೀತಿಯಾಗಿ ಮಾತನಾಡುವ, ವಾದ
ಮಾಡುವ ನಾವೆಲ್ಲರೂ ಬಂಡವಾಳಶಾಹಿ – ಕ್ಯಾಪಿಟಲಿಸ್ಟುಗಳೇ ಅಲ್ಲವೇ ಎನ್ನುವ ಯೋಚನೆ ಸುಳಿಯುತ್ತದೆ. ಅಬ್ಬಬ್ಬಾ
ಅಂದರೆ ಒಂಚೂರು ಎಡಕ್ಕಿರುವ ಅಥವಾ ಒಂದಷ್ಟು ಬಲಕ್ಕಿರುವ ಕ್ಯಾಪಿಟಲಿಸ್ಟುಗಳಷ್ಟೇ ಅಲ್ಲವೇ ನಾವು ಬಹುತೇಕರು…
ನರಸಿಂಹರಾವ್ ಕಾಲದಲ್ಲಿ, ಮನಮೋಹನ್ ಸಿಂಗ್ರವರು ಹಣಕಾಸು ಸಚಿವರಾಗಿದ್ದಾಗಿನ ಸಮಯದಲ್ಲಿ ಇಂಡಿಯಾ ಜಾಗತೀಕರಣಕ್ಕೆ ಸಂಪೂರ್ಣವಾಗಿ ತೆರೆದುಕೊಂಡಿತು. ಹಲವು ವರುಷಗಳ ಕಾಲ ವಿಧವಿಧದ ವಿರೋಧಗಳನ್ನು ಈ ಹೊಸ ಆರ್ಥಿಕ ನೀತಿಗಳು ಎದುರಿಸಿತಾದರೂ ಅಂತಿಮವಾಗಿ ಕ್ಯಾಪಿಟಲಿಸಂ ಎನ್ನುವ ಸಿದ್ಧಾಂತವಲ್ಲದ ಸಿದ್ಧಾಂತ ಉಳಿದೆಲ್ಲ ಸಿದ್ಧಾಂತಗಳನ್ನು ಮೀರಿ ಜಯಿಸಲಾರಂಭಿಸಿತು ಎನ್ನುವುದು ತಿರಸ್ಕರಿಸಲಾಗದ ವಾಸ್ತವ.
Nov 22, 2024
ಎಲ್ಲೆಡೆ ಸಲ್ಲುವ “ಬಂಧಮುಕ್ತ”

ಡಾ. ಅಶೋಕ್. ಕೆ. ಆರ್
ಕೆಲವೊಂದು ಪುಸ್ತಕಗಳೇ ಹಾಗೆ, ನೇರಾನೇರ ಸಂಬಂಧವಿಲ್ಲದಿದ್ದರೂ ನಮ್ಮ ನಡುವಿನದೇ ಪುಸ್ತಕವೆನಿಸಿಬಿಡುತ್ತದೆ. ನಮ್ಮದಲ್ಲದ ಸಂಸ್ಕೃತಿಯ, ನಮ್ಮ ದೇಶದ್ದಲ್ಲದ, ನಮ್ಮ ಖಂಡದ್ದೂ ಅಲ್ಲದ ದೂರದ ದೇಶವೊಂದರ ಲೇಖಕಿಯ ಬರಹಗಳು ನಮ್ಮ ಸುತ್ತಮುತ್ತಲಿನ ಸಮಾಜಕ್ಕೇ ಕನ್ನಡಿ ಹಿಡಿದಂತಿರುವುದನ್ನು ಮೆಚ್ಚಬೇಕೋ ಅಲ್ಲಿರುವ ಸಂಕಷ್ಟ ದುಮ್ಮಾನಗಳು ನಮ್ಮಲ್ಲೂ ಇರುವುದಕ್ಕೆ ದುಃಖ ಪಡಬೇಕೋ ಎನ್ನುವ ಗೊಂದಲಗಳೊಂದಿಗೆಯೇ ಪುಸ್ತಕ ಓದಿ ಮುಗಿಸಿದೆ.
ಈ ಪುಸ್ತಕದ ವ್ಯಾಪ್ತಿ ಹಿರಿದಾದುದು. ಕಪ್ಪು ಜನರ ಬವಣೆ, ಕಪ್ಪು ಮಹಿಳೆಯರ ಬವಣೆ, ಸ್ತ್ರೀವಾದ, ಬದಲಾದ ಸಮಾಜದಲ್ಲಿ ಶೋಷಣೆಯ ರೂಪಗಳೂ ಮಾರ್ಪಾಡಾಗುವುದು, ಒಂದು ಕಾಲದಲ್ಲಿ ಶೋಷಣೆಗೊಳಗಾಗಿದ್ದವರೆ ಮತ್ತೊಂದು ಹಂತದಲ್ಲಿ ಶೋಷಕರಾಗುವ ಬಗೆ…ಇವೆಲ್ಲದರ ಜೊತೆಗೆ ಮನುಕುಲದ ಅವನತಿಗೆ ಬಹುಮಖ್ಯ ಕಾರಣವಾದ ಸ್ವಪ್ರೀತಿಯ ಕೊರತೆಯ ಬಗೆಗಿನ ಒಳನೋಟಗಳನ್ನು ಕೊಡುವ ಪುಸ್ತಕ ಬೆಲ್ ಹುಕ್ಸ್ರವರ “ಬಂಧ ಮುಕ್ತ, ಪ್ರೀತಿಯ ಹುಡುಕಾಟದಲ್ಲಿ ದಮನಿತರು”. ಶ್ರೀಮತಿ ಎಚ್.ಎಸ್ರವರ ಸಶಕ್ತ ಅನುವಾದವು ಪುಸ್ತಕವನ್ನು ಮತ್ತಷ್ಟು ಆಪ್ತಗೊಳಿಸುತ್ತದೆ.
Mar 13, 2024
ಕಣ್ಣು ಮಿಟುಕಿಸದೇ ನೋಡಿಸಿಕೊಳ್ಳುವ 'ಬ್ಲಿಂಕ್'
ಟೈಂ ಟ್ರಾವೆಲ್ ಹಿನ್ನೆಲೆಯ ಕಲ್ಪನಾತ್ಮಕ - ವೈಜ್ಞಾನಿಕ (?) ಚಿತ್ರಕ್ಕೆ ಹೆಚ್ಚಿನ ಬಜೆಟ್ ಅತ್ಯವಶ್ಯವಿದೆ ಎನ್ನುವ ಸಾಮಾನ್ಯ ತಿಳುವಳಿಕೆಯನ್ನು ಸುಳ್ಳಾಗಿಸುವ ಚಿತ್ರ ಬ್ಲಿಂಕ್. ಗಟ್ಟಿ ಚಿತ್ರಕತೆಯಿದ್ದು ಉತ್ತಮ ನಿರ್ದೇಶನವಿದ್ದರೆ ಕಡಿಮೆ ಬಜೆಟ್ಟಿನಲ್ಲಿ, ಸುತ್ತಮುತ್ತಲಿರುವ ಕೆಲವೊಂದು ಜಾಗಗಳನ್ನು ಬಳಸಿಕೊಂಡೇ ಒಂದು ಉತ್ತಮ, ಉತ್ತಮವೇನು ಅತ್ಯುತ್ತಮ ಚಿತ್ರವನ್ನೇ ಜನರ ಮುಂದಿಡಬಹುದೆಂದು ಬ್ಲಿಂಕ್ ನ ನಿರ್ದೇಶಕ ಶ್ರೀನಿಧಿ ತೋರಿಸಿಕೊಟ್ಟಿದ್ದಾರೆ.
ಅನಾದಿ ಕಾಲದಿಂದಲೂ ಆಗೊಮ್ಮೆ ಈಗೊಮ್ಮೆ ಎಲ್ಲಾ ಭಾಷೆಗಳಲ್ಲಿ ಟೈಂ ಟ್ರಾವೆಲ್ನ ಕುರಿತಾದ ಚಿತ್ರಗಳು ಮೂಡಿಬರುತ್ತಲೇ ಇವೆ. ವಾಸ್ತವದಲ್ಲಿರುವುದನ್ನು ಬಿಟ್ಟು ಹಿಂದಿನ ಮುಂದಿನ ಸಮಯಕ್ಕೆ ಹೋಗುವಾಸೆ ಮನುಷ್ಯನಿಗೆ ಇದ್ದೇ ಇದೆಯಲ್ಲ! ಲಾಜಿಕ್ಕಾಗಿ ನೋಡಿದರೆ ಟೈಂ ಟ್ರಾವೆಲ್ ಅನ್ನೋದೆ ಇಲ್ಲಾಜಿಕಲ್! ಹಂಗಾಗಿ ಟೈಂ ಟ್ರಾವೆಲ್ ಯಾವ ರೀತಿ ಮಾಡಿದರು ಅನ್ನೋದರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಬಾರದು. ವಾಚ್ ಕಟ್ಟಿಕೊಂಡು, ಟೈಂ ಮೆಷೀನಿನ ಒಳಗೆ ಕುಳಿತುಕೊಂಡು, ಏನನ್ನೋ ಕುಡಿದು… ಹೀಗೆ ಹತ್ತಲವು ರೀತಿಯಲ್ಲಿ ಟೈಂ ಟ್ರಾವೆಲ್ಲನ್ನು ಚಿತ್ರಗಳಲ್ಲಿ ತೋರಿಸಿದ್ದಾರೆ, ಬ್ಲಿಂಕ್ ಚಿತ್ರದಲ್ಲಿ ಅಡ್ವಾನ್ಸ್ಡ್ ಲ್ಯಾಪ್ ಟಾಪಿನ ಮುಂದೆ ಕುಳಿತುಕೊಂಡು ದ್ರವ್ಯವೊಂದನ್ನು ಕಣ್ಣಿಗೆ ಎರಡು ತೊಟ್ಟು ಹಾಕಿಕೊಂಡರೆ ಸಾಕು ನಮಗೆ ಯಾವ ಹಿಂದಿನ ಕಾಲಕ್ಕೆ ಹೋಗಬೇಕೋ ಅಲ್ಲಿಗೆ ಹೋಗಿಬಿಡಬಹುದು. ಹೇ! ಅಷ್ಟು ಸುಲಭದಲ್ಲಿ ಟೈಂ ಟ್ರಾವೆಲ್ ಮಾಡಿಬಿಡಬಹುದಾ ಅಂತೆಲ್ಲ ಕೇಳಬೇಡಿ. ಟೈಂ ಟ್ರಾವೆಲ್ ಅನ್ನೋದೆ ಅಸಾಧ್ಯವಾಗಿರುವಾಗ ಅಷ್ಟು ಸುಲಭದಲ್ಲೋ ಇಷ್ಟು ಕಷ್ಟದಲ್ಲೋ ಅನ್ನೋದೆಲ್ಲ ಇಲ್ಲಾಜಿಕಲ್ ಪರಿಧಿಯೊಳಗೇ ಇರ್ತದೆ!
Apr 18, 2023
ಕಾಡಿನ ನ್ಯಾಯಕ್ಕೆ ವಿರುದ್ಧವಾದ "ದಿ ಎಲಿಫೆಂಟ್ ವಿಸ್ಪರರ್ಸ್"
![]() |
ಚಿತ್ರಮೂಲ: ಎಕನಾಮಿಕ್ ಟೈಮ್ಸ್ |
ಕಾಡ ನಡುವಿನಲ್ಲಿ ಮರಿಯಾನೆಯೊಂದು ಹಿಂಡಿನಿಂದ ಬೇರ್ಪಟ್ಟು ಒಂಟಿಯಾಗುತ್ತದೆ. ಆಹಾರ ಹುಡುಕುವ, ನೀರನ್ನರಸುವ ಗುಣಗಳನ್ನು ಹಿಂಡಿನ ಹಿರಿಯರಿಂದ ಇನ್ನೂ ಕಲಿಯದ ಮರಿಯಾನೆಗೆ ಜೀವವುಳಿಸಿಕೊಳ್ಳುವುದು ಕಷ್ಟದ ಸಂಗತಿಯೇ ಸರಿ. ಮರಿಯಾನೆಯ ಕೂಗಾಟ ಅರಣ್ಯ ಇಲಾಖೆಯ ಕಿವಿಗೆ ತಲುಪುತ್ತದೆ. ಕಾಡಿನ ನಿಯಮಗಳಿಂದ ರಕ್ಷಿಸಲ್ಪಟ್ಟ ಈ ಮರಿಯಾನೆಯನ್ನು ಸಾಕುವ ಜವಾಬ್ದಾರಿಯನ್ನು ಇಲಾಖೆಯ ಕೆಲಸಗಾರರಾದ, ಮೂಲತಃ ಆದಿವಾಸಿಗಳಾದ ಇಬ್ಬರಿಗೆ ವಹಿಸಲಾಗುತ್ತದೆ. ಆ ಈರ್ವರ ನಡುವಿನ ವೈಯಕ್ತಿಕ ಸಂಬಂಧ, ಆನೆಯನ್ನು ಸಾಕಿ ಸಲಹುವ ಪರಿ, ಆನೆ ಜೊತೆಗಿನ ಮಮಕಾರದ ಸಂಬಂಧವೇ "ದಿ ಎಲಿಫೆಂಟ್ ವಿಸ್ಪರರ್ಸ್" ಸಾಕ್ಷ್ಯಚಿತ್ರದ ಹೂರಣ.
ಆಸ್ಕರ್ರಿಗೆ ಭಾರತದಿಂದ ಕಳುಹಿಸಲ್ಪಟ್ಟ ಸಾಕ್ಷ್ಯಚಿತ್ರಕ್ಕೆ ಅತ್ಯುತ್ತಮವೆಂಬ ಪ್ರಶಸ್ತಿಯೂ ದೊರೆತು ಖ್ಯಾತಿಗಳಿಸಿದ ಚಿತ್ರ ನೆಟ್ ಫ್ಲಿಕ್ಸ್ ನಲ್ಲಿ ನೋಡಲು ಲಭ್ಯವಿದೆ. ಆಸ್ಕರ್ ದೊರೆಯುವ ಮುಂಚೆ ಈ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದ್ದೆ. ನೋಡಿದ ಯಾರಿಗಾದರೂ ಕಣ್ಣಂಚಿನಲ್ಲಿ ನೀರು ತರಿಸುವ ಚಿತ್ರವಿದು. ನಾನೂ ಅದಕ್ಕೆ ಹೊರತಲ್ಲ.
Aug 19, 2022
ಎಲ್ಲಕಿಂತ ಜೀವ ಮುಖ್ಯ…
Nov 28, 2021
ನೀಟ್ ಪರೀಕ್ಷೆಯ ಸುತ್ತ.
ವರುಷಕ್ಕೊಂದು ಸಲ ನೀಟ್ ಪರೀಕ್ಷೆಯಿಂದಾಗುವ (ಯುಜಿ ನೀಟ್) ʼಅನಾಹುತʼಗಳ ಬಗ್ಗೆ ಚರ್ಚೆ ನಡೆಯುತ್ತಲೇ ಇದೆ. ಈ ಚರ್ಚೆಗಳಲ್ಲಿ ಕಂಡುಬರುವ ಹೆಚ್ಚಿನ ವಿಚಾರಗಳೆಂದರೆ:
೧. ನೀಟ್ ಪರೀಕ್ಷೆಯಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚು ತೊಂದರೆಯಾಗುತ್ತಿದೆ. ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಗ್ರಾಮೀಣ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ಸಿಗದಂತೆ ನೀಟ್ ಮಾಡಿಬಿಟ್ಟಿದೆ.
೨. ನೀಟ್ ಪರೀಕ್ಷೆಯಿಂದ ಹೊರರಾಜ್ಯದ ವಿದ್ಯಾರ್ಥಿಗಳು ಹೆಚ್ಚು ಸೀಟು ಕಬಳಿಸುತ್ತಿದ್ದಾರೆ. ಕರ್ನಾಟಕದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ.
೩. ಪರೀಕ್ಷೆಗಳು ರಾಜ್ಯಗಳ ನಿಯಂತ್ರಣದಲ್ಲಿರಬೇಕೆ ಹೊರತು ಒಕ್ಕೂಟ ಸರಕಾರದ ನಿಯಂತ್ರಣದಲ್ಲಿರಬಾರದು.